ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು! – Kannada News | Karnataka Senior IAS Officer, Mahantesh Bilagi Dies In Car Accident Near jewargi at Kalaburagi

0
8
Advertisement


ಕಲಬುರಗಿ, (ನವೆಂಬರ್ 25):  ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS Officer Mahantesh Bilagi)  ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ  ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಇಂದು (ನವೆಂಬರ್ 25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ.  ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮೂವರು ಸಹೋದರರು ದುರಂತ ಸಾವು: IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು

ಮರಣೋತ್ತರ ಪರೀಕ್ಷೆಗಾಗಿ ಮಹಾಂತೇಶ ಬೀಳಗಿ ಪಾರ್ಥೀವ ಶರೀರವನ್ನು ಮಣ್ಣೂರ ಖಾಸಗಿ ಆಸ್ಪತ್ರೆಯಿಂದ ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್​ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ‌ದೌಡಾಯಿಸಿದ್ದಾರೆ.

1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದು, ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಇನ್ನು ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು.

ಡಿಸಿಎಂ ಡಿಕೆ ಶಿವಕುಮಾರ್​ ಸಂತಾಪ

ಅಪಘಾತದಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ದಾವಣಗೆರೆ, ಉಡುಪಿ ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದು, ಜನಪರ ಕಾರ್ಯಗಳ‌ ಮೂಲಕ ಹೆಸರುವಾಸಿಯಾಗಿದ್ದರು. ದಕ್ಷ ಅಧಿಕಾರಿಯ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮಹಾಂತೇಶ್​ ಬೀಳಗಿ ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ಕುಟುಂಬದವರಿಗೆ ನೋವು ಭರಿಸುವ ಶಕ್ತಿ ‌ದೇವರು ನೀಡಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

Published On – 7:40 pm, Tue, 25 November 25



Source link

LEAVE A REPLY

Please enter your comment!
Please enter your name here

7 + three =